https://youtu.be/NHc6OMSu0K4?si=SI_K4goOPEgwo6h2


ಹಂಪಿ ಟೈಮ್ಸ್ ಹೊಸಪೇಟೆ
ದೇಶದ ಗಡಿ ಕಾಯುವ ಸೈನಿಕರಷ್ಟೇ, ಜನರ ಮಧ್ಯೆ ಇದ್ದು ಎಲ್ಲರಿಗೂ ರಕ್ಷಣೆ ನೀಡುವ ಪೊಲೀಸರ ಸೇವೆ ಅವಿಸ್ಮರಣೀಯ ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ಅಭಿಪ್ರಾಯಪಟ್ಟರು.
ಜಿಲ್ಲಾ ಪೊಲೀಸ್ ಕಾರ್ಯಾಲಯದ ಆವರಣದಲ್ಲಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಂಗಳವಾರ ಅವರು ಮಾತನಾಡಿದರು. ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಪ್ರತಿಯೊಬ್ಬ ನಾಗರಿಕರನ್ನು ರಕ್ಷಿಸಲು ಅಪಾರ ಕೊಡುಗೆ ನೀಡಿದ್ದಾರೆ. ದೇಶದಲ್ಲಿ ಶಾಂತಿ ಮತ್ತು ಸುರಕ್ಷತೆ ಕಾಪಾಡಲು ತಮ್ಮ ವೈಯಕ್ತಿಕ ಜೀವನವನ್ನು ತ್ಯಾಗ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯವರ ಧೈರ್ಯ, ಶೌರ್ಯ ಮತ್ತು ಸಮರ್ಪಣಾ ಮನೋಭಾವಕ್ಕೆ ಸದಾ ಋಣಿಯಾಗಿರಬೇಕು. ಪ್ರವಾಹ, ಭಯೋತ್ಪಾದನೆಯಂತಹ ಹಲವಾರು ಆಪತ್ತುಗಳ ವೇಳೆಯಲ್ಲಿ ನಮ್ಮನ್ನು ರಕ್ಷಿಸಲು ಜೀವದ ಹಂಗು ತೊರೆದು ಕಾರ್ಯನಿರ್ವಹಿಸುವ ಪೊಲೀಸರ ಸೇವೆ ಮಹತ್ವದ್ದಾಗಿದೆ. ಕಾನೂನು ಪಾಲನೆ ಮತ್ತು ಇಲಾಖೆಯನ್ನು ಬಲಪಡಿಸಲು ಹಾಗೂ ಪೊಲೀಸ್ ಅಧಿಕಾರಿ ಕಲ್ಯಾಣಕ್ಕಾಗಿ ಹೆಚ್ಚಿನ ಶ್ರಮ ವಹಿಸಬೇಕಾಗಿದೆ. ಪೊಲೀಸರು ಮಾಡುವ ಸಮಾಜ ರಕ್ಷಣೆಯ ಕಾರ್ಯಕ್ಕೆ ಪ್ರತಿಯೊಬ್ಬರೂ ಬೆಂಬಲಿಸಬೇಕು. ಜಿಲ್ಲೆಯಲ್ಲಿ ಇತ್ತೀಚೆಗೆ ಹುತಾತ್ಮರಾದ ಪೊಲೀಸರ ಕುಟುಂಬಗಳಿಗೆ ಆತ್ಮಸ್ಥೈರ್ಯ ತುಂಬಬೇಕಾಗಿದೆ. ಹುತಾತ್ಮರ ತ್ಯಾಗವನ್ನು ಸ್ಮರಿಸುವುದು ಮಾತ್ರವಲ್ಲ, ಅವರ ಕುಟುಂಬಗಳಿಗೆ ಬೆಂಬಲವಾಗಿ ನಿಲ್ಲುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಅವರು ಮಾತನಾಡಿ, ರಾಷ್ಟ್ರದಾದ್ಯಂತ ಇಂದು ಪೊಲೀಸ್ ಹುತಾತ್ಮರ ದಿನ ಆಚರಿಸುತ್ತಿದ್ದು, ಈ ಮೂಲಕ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಗೌರವ ಸಲ್ಲಿಸಲಾಗುತ್ತದೆ. ಅಕ್ಟೋಬರ್ 21, 1959ರಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಈನೇತೃತ್ವ ವಹಿಸಿದ್ದ ಕರಣ್ಸಿಂಗ್ ಅವರ ನೇತೃತ್ವದಲ್ಲಿ ಭಾರತದಲ್ಲಿ ಅತಿಕ್ರಮಣ ಮಾಡಿದ ಚೀನಾ ಸೈನಿಕರು ಮತ್ತು ಭಾರತೀಯ ಸಿಆರ್ಪಿಎಫ್ ಪೊಲೀಸರ ಮಧ್ಯೆ ನಡೆದ ಘರ್ಷಣೆಯಲ್ಲಿ ಹತ್ತು ಭಾರತೀಯ ಪೊಲೀಸರು ಹುತಾತ್ಮರಾಗಿದ್ದರು. ಅಲ್ಲದೆ, ಒಂಬತ್ತು ಮಂದಿಯನ್ನು ಚೀನಾ ಸೈನಿಕರು ಸೆರೆ ಹಿಡಿದುಕೊಂಡಿದ್ದರು. ಅದರ ಸ್ಮರಣಾರ್ಥವಾಗಿ ಪೊಲೀಸ್ ಹುತಾತ್ಮರ ದಿನಾಚರಣೆ ಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಕರ್ತವ್ಯ ಪಾಲನೆಯಲ್ಲಿ ಪೊಲೀಸ್ ಪಡೆಗಳು ತಮ್ಮ ಜೀವನವನ್ನು ಮುಡಿಪಾಗಿಟ್ಟು ಹೋರಾಡಿದ ಹುತಾತ್ಮರನ್ನು ನಾವು ಸ್ಮರಿಸಬೇಕಾಗಿದೆ. ಸಿಆರ್ಪಿಎಫ್ ಜವಾನರ ಧೈರ್ಯ ಮತ್ತು ಆತ್ಮ ಸಮರ್ಪಣೆಯನ್ನು ಭಾರತ ದೇಶದ ಎಲ್ಲಾ ಪ್ರಜೆಗಳು ಸ್ಮರಿಸುತ್ತಾರೆ. ವೀರ ಮರಣವನ್ನಪ್ಪಿದ ಜವಾನರ ಸವಿನೆನಪಿಗಾಗಿ ಸ್ಮಾರಕವನ್ನು ನಿರ್ಮಿಸಲಾಗಿದೆ. ತಮ್ಮ ಕರ್ತವ್ಯ ಪಾಲನೆಯಲ್ಲಿ ಪ್ರತಿ ವರ್ಷ ದೇಶದಲ್ಲಿ ಅನೇಕ ಪೊಲೀಸ್ ಸಿಬ್ಬಂದಿ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಂತಹ ಸ್ಮರಣೆಗಾಗಿ ಪ್ರತಿ ವರ್ಷ ಅಕ್ಟೋಬರ್ 21ರಂದು ಪೊಲೀಸ್ ದಿನಾಚರಣೆಯನ್ನು ನಡೆಸಲಾಗುತ್ತಿದೆ.



ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ ಹುತಾತ್ಮರಾದ 191 ಪೊಲೀಸ್ ಅಧಿಕಾರಿ, ಸಿಬ್ಬಂದಿಯವರಲ್ಲಿ ಕರ್ನಾಟಕ ರಾಜ್ಯದ 08 ಪೊಲೀಸ್ ಅಧಿಕಾರಿ, ಸಿಬ್ಬಂದಿಯವರು ಸಹ ಕರ್ತವ್ಯಪಾಲನೆಯಲ್ಲಿ ಹುತಾತ್ಮರಾಗಿದ್ದಾರೆ ಎಂದು ಸ್ಮರಿಸಿದರು.
ಗೌರವ ಸಮರ್ಪಣೆ: ಕಾರ್ಯಕ್ರಮದ ಆರಂಭದಲ್ಲಿ ಪೊಲೀಸ್ ಸ್ಮಾರಕಕ್ಕೆ ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಇತರೆ ಅಧಿಕಾರಿಗಳು ಹಾಗೂ ಹಲವು ಗಣ್ಯರು ಪುಷ್ಪನಮನ ಸಲ್ಲಿಸಿದರು. ಹುತಾತ್ಮರಿಗೆ ಗೌರವ ಸಮರ್ಪಣೆಗಾಗಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಲಾಯಿತು ಹಾಗೂ ಮೌನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಸೇರಿದಂತೆ ಡಿ.ವೈ.ಎಸ್.ಪಿ.ಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.





More Stories
ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಫೈನಲ್ಗೆ ಭಾರತ ಮಹಿಳಾ ತಂಡದ ಪ್ರವೇಶ
ಹೊಸಪೇಟೆಯಲ್ಲಿ ಗುರುವಂದನಾ ಕಾರ್ಯಕ್ರಮ: ಹಳೇ ವಿದ್ಯಾರ್ಥಿಗಳ ಸಾಧನೆಗೆ ಗುರುಗಳ ಹರ್ಷ
ಜಗದ್ಗುರು ಬಸವಲಿಂಗ ಶ್ರೀಗಳಿಗೆ 32ನೇ ವರ್ಷದ ಜನ್ಮದಿನೋತ್ಸವದ ಸಂಭ್ರಮ