https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಕೊಪ್ಪಳ:
2026ರ ಜನವರಿ 5ರಂದು ನಡೆಯಲಿರುವ ಕೊಪ್ಪಳದ ಪ್ರಸಿದ್ಧ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವವನ್ನು ಅತೀ ವಿಜೃಂಭಣೆಯಿಂದ ಮತ್ತು ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಇಂದಿನಿಂದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಸೂಚಿಸಿದರು.
ಅವರು ಗುರುವಾರ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದಕ್ಷಿಣ ಭಾರತದ ಕುಂಭ ಮೇಳ ಎಂದು ಪ್ರಸಿದ್ಧವಾಗಿರುವ ಈ ಜಾತ್ರೆಗೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಭಕ್ತಾದಿಗಳಿಗೆ ಕುಡಿಯುವ ನೀರು, ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ, ಜಾತ್ರೆಗೆ ವಿದ್ಯುತ್ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು. ಜಾತ್ರೆಯು ಶಾಂತಿಯುತವಾಗಿ ಜರುಗುವಂತೆ ಜಿಲ್ಲಾಡಳಿತವು ಸಕಲ ರೀತಿಯ ಸಹಕಾರ ನೀಡಲಿದ್ದು, ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಸಮಿತಿಗಳನ್ನು ರಚಿಸಿ ಅವರಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.
ಸೌಕರ್ಯ ಮತ್ತು ಸುರಕ್ಷತೆಗೆ ಒತ್ತು: ರಥೋತ್ಸವ ಮತ್ತು ಇನ್ನುಳಿದ ದಿನಗಳಲ್ಲಿ ಲಕ್ಷಾಂತರ ಭಕ್ತರು ಶ್ರೀಮಠಕ್ಕೆ ಆಗಮಿಸುವುದರಿಂದ ಸೂಕ್ತ ಪೊಲೀಸ್ ಭದ್ರತೆ ಹಾಗೂ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಕ್ರಮ ಕೈಗೊಳ್ಳಲು ಸೂಚಿಸಲಾಯಿತು. ಮಠದ ಆವರಣದಲ್ಲಿ ಆಂಬುಲೆನ್ಸ್ ಮತ್ತು ಅಗ್ನಿಶಾಮಕ ವಾಹನಗಳನ್ನು ಕಾಯ್ದಿರಿಸಬೇಕು ಮತ್ತು ತುರ್ತು ಸಂದರ್ಭದಲ್ಲಿ ಆಂಬುಲೆನ್ಸ್ ಸಂಚರಿಸಲು ಅನುಕೂಲವಾಗುವಂತೆ ಬ್ಯಾರಿಕೇಡ್ ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಲಾಯಿತು.

ಕೊಪ್ಪಳ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ, ಮಹಾದಾಸೋಹಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆ, ಆಹಾರ ಸುರಕ್ಷಾ ಕ್ರಮಗಳ ಬಗ್ಗೆ ಅಡುಗೆ ಸಿಬ್ಬಂದಿಯೊಂದಿಗೆ ಸಭೆ ನಡೆಸುವುದು ಹಾಗೂ ಜಾತ್ರೆ ಸ್ಥಳದಲ್ಲಿ ತುರ್ತು ಆರೋಗ್ಯ ಘಟಕವನ್ನು ಸ್ಥಾಪಿಸಿ ಕರ್ತವ್ಯಕ್ಕೆ ತಜ್ಞ ವೈದ್ಯರು ಮತ್ತು ಶುಶ್ರೂಕಿಯರನ್ನು ನಿಯೋಜಿಸಬೇಕು ಎಂದು ತಿಳಿಸಿದರು. ದಾಸೋಹ ರಸ್ತೆಗಳು, ಅಂಗಡಿ ಮಳಿಗೆಗಳು, ತೇರು ಸಾಗುವ ಆವರಣ ಮತ್ತು ಪಾರ್ಕಿಂಗ್ ಸ್ಥಳಗಳಲ್ಲಿ ಕಸ ವಿಲೇವಾರಿ ಮಾಡಿ ಧೂಳು ಬಾರದಂತೆ ನೀರಿನ ವ್ಯವಸ್ಥೆ ಮಾಡುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್. ಎಲ್ ಅರಸಿದ್ದಿ ಅವರು ಮಾತನಾಡಿ, ಜಾತ್ರೆಯು ದೊಡ್ಡ ಪ್ರಮಾಣದಲ್ಲಿ ನಡೆಯುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಿ ಭದ್ರತಾ ವ್ಯವಸ್ಥೆ ಮಾಡಲಾಗುವುದು. ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ ಮತ್ತು ಟ್ರಾಫಿಕ್ ಸಮಸ್ಯೆಗಳಾಗದಂತೆ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಕುರಿತು ಮುಂಚಿತವಾಗಿ ಮಾಧ್ಯಮಗಳ ಮೂಲಕ ಮಾಹಿತಿ ನೀಡಲಾಗುವುದು ಎಂದು ಭರವಸೆ ನೀಡಿದರು.
ನಗರಸಭೆ ಅಧಿಕಾರಿಗಳು ಸ್ವಚ್ಛತೆಗೆ ಹೆಚ್ಚಿನ ಪೌರ ಕಾರ್ಮಿಕರ ನಿಯೋಜಿಸಬೇಕು ಹಾಗೂ ಜಾತ್ರೆಯಲ್ಲಿ ಯಾವುದೇ ರೀತಿಯ ವಿದ್ಯುತ್ ಅವಘಡಗಳಾಗದಂತೆ ಜೆಸ್ಕಾಂ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಯವರು ಸೂಚಿಸಿದರು.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಸಹಾಯಕ ಆಯುಕ್ತರಾದ ಮಹೇಶ್ ಮಾಲಗಿತ್ತಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶ ಜಗದೀಶ, ಕೊಪ್ಪಳ ತಹಶಿಲ್ದಾರ ವಿಠ್ಠಲ್ ಚೌಗಲಾ, ಕೊಪ್ಪಳ ನಗರಸಭೆ ಪೌರಾಯುಕ್ತ ವೆಂಕಟೇಶ ನಾಗನೂರು ಸೇರಿದಂತೆ ಲೋಕೋಪಯೋಗಿ, ಸಾರಿಗೆ ಮತ್ತು ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.



More Stories
ಬಿಡಿಸಿಸಿ ಬ್ಯಾಂಕ್ಗೆ 106ನೇ ಸಂಸ್ಥಾಪನಾ ದಿನಾಚರಣೆ ಸಂಭ್ರಮ
ಸಿರಿ ಧಾನ್ಯ ಬೆಳೆಗೆ ಹೆಚ್ಚಿನ ಆದ್ಯತೆ ನೀಡಿ: ಡಾ. ಸುರೇಶ ಇಟ್ನಾಳ
ಮಹತ್ವಕಾಂಕ್ಷಿ ಕ್ರೀಡಾ ಯೋಜನೆಗಳು ಹಾಗೂ ಕ್ರೀಡೆಯ ಭವಿಷ್ಯ??