https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಹೊಸಪೇಟೆ
ವಿಶ್ವ ಪ್ರಸಿದ್ಧಿ ವಿಶ್ವಪಾರಂಪರಿಕ ತಾಣವಾದ ಹಂಪಿ ಉತ್ಸವವು ನಾಡ ಹಬ್ಬವಿದ್ದಂತೆ, ಎಲ್ಲರೂ ಸೇರಿ ವಿಜೃಂಭಣೆಯಿಂದ ಹಾಗೂ ವಿನೂತನವಾಗಿ ಆಚರಿಸಲು ಎಲ್ಲಾ ಸಿದ್ದತೆ ಕೈಗೊಳ್ಳುವಂತೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅಧಿಕಾರಿಗಳಿಗೆ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಹಂಪಿ ಉತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಂಪಿ ಉತ್ಸವವು ಮುಂಬರುವ ಫೆಬ್ರವರಿ 13, 14 ಹಾಗೂ 15 ರಂದು ಹಮ್ಮಿಕೊಳ್ಳಲಾಗಿದೆ. ಫೆಬ್ರವರಿ 13ರಂದು ಹಂಪಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿದ್ಯುಕ್ತವಾಗಿ ಚಾಲನೆ ನೀಡುವರು. ಆದ್ದರಿಂದ ಅಧಿಕಾರಿಗಳು ಕಳೆದ ಬಾರಿಗಿಂತಲೂ ಈ ವರ್ಷ ಅಚ್ಚುಕಟ್ಟಾಗಿ ಆಯೋಜನೆ ಮಾಡುವ ನಿಟ್ಟಿನಲ್ಲಿ ಅಗತ್ಯ ಸಿದ್ದತೆ ಕೈಗೊಳ್ಳಬೇಕು. ಕಳೆದ ಬಾರಿ ಉಂಟಾದ ಲೋಪದೋಷ, ಇನ್ನಿತರೆ ಸಮಸ್ಯೆಗಳು ಮರುಕಳಿಸದಂತೆ ಅಗತ್ಯ ಕ್ರಮವಹಿಸಬೇಕು ಎಂದರು.

ಶಿಷ್ಟಾಚಾರದಂತೆ ವೇದಿಕೆ ಕಾರ್ಯಕ್ರಮ ಸಿದ್ದತೆ ಮಾಡಿಕೊಳ್ಳಬೇಕು. ಆರೋಗ್ಯ ಇಲಾಖೆಯಿಂದ ವೈದ್ಯಕೀಯ ತಪಸಣಾ ಶಿಬಿರ ಆಯೋಜನೆ ಮಾಡುವಂತೆ ನಿರ್ದೇಶಿಸಿದರು. ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು ಎಂದು ತಿಳಿಸಿದ ಅವರು, ಜಿಲ್ಲೆಯ ವಿವಿಧ ತಾಲ್ಲೂಕು ಹಾಗೂ ಗ್ರಾಮೀಣ ಭಾಗದಿಂದ ಬರುವಂತಹ ಸಾರ್ವಜನಿಕರಿಗೆ ಕೆಎಸ್ಆರ್ಟಿಸಿ ವತಿಯಿಂದ ಸಾರಿಗೆ ವ್ಯವಸ್ಥೆ, ಅಗತ್ಯ ಮೂಲಭೂತ ಸೌಕರ್ಯ ಒದಗಿಸಲಾಗುವುದು ಎಂದರು. ಉತ್ಸವದ ಅಂಗವಾಗಿ ಕಲೆ, ಚಿತ್ರಕಲೆ, ವಾಸ್ತುಶಿಲ್ಪ, ಫಲಪುಷ್ಪ ಪ್ರದರ್ಶನ, ಸಾಹಸ ಕ್ರೀಡೆ, ಸುಗಮ ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು. ಸ್ಥಳೀಯ ಕಲಾವಿದರಿಂದ ವಿಜಯನಗರ ಸಾಮ್ರಾಜ್ಯದ ಆಡಳಿತ ಗತವೈಭವ ಕುರಿತ ಧ್ವನಿ ಬೆಳಕು ಪ್ರದರ್ಶನ ಮಾಡಲಾಗುತ್ತದೆ. ಅದರಂತೆ ಖ್ಯಾತ ಕಲಾವಿದರು ಹಂಪಿ ಉತ್ಸವದಲ್ಲಿ ಭಾಗವಹಿಸಿ ನಾಡಹಬ್ಬ ಹಂಪಿ ಉತ್ಸವಕ್ಕೆ ಮತ್ತಷ್ಟು ಮೆರಗು ತುಂಬಲಿದ್ದಾರೆ ಎಂದು ತಿಳಿಸಿದರು.
ವಿಶೇಷ ಡ್ರೋನ್ ಶೋ ಹಾಗೂ ಗಾಳಿಪಟ ಉತ್ಸವ: ಈ ಬಾರಿ ಉತ್ಸವದಲ್ಲಿ ವಿಶೇಷವಾಗಿ ಮುಂಬೈ ತಾಂತ್ರಿಕ ಕಲಾಬಳಗದಿಂದ ಮೂರು ಸಾವಿರ ಡ್ರೋನ್ ಬಳಸಿ ಡ್ರೋನ್ ಶೋ ಏರ್ಪಡಿಸಲಾಗಿದೆ. ಅದರಂತೆ ಗಾಳಿಪಟ ಉತ್ಸವ ಕೂಡ ಆಯೋಜಿಸಲಾಗಿದ್ದು, ಇವು ಹಂಪಿ ಉತ್ಸವದ ವರ್ಷದ ವಿಶೇಷವಾಗಿದ್ದು ಮತ್ತಷ್ಟು ರಂಗು ಹೆಚ್ಚಿಲಿವೆ ಎಂದರು.
ಇದೇ ಸಂದರ್ಭದಲ್ಲಿ ಹಂಪಿ ಉತ್ಸವ ಲೋಗೋ ಬಿಡುಗಡೆಗೊಳಿಸಿದರು. ಸಭೆಯಲ್ಲಿ ಹುಡಾ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ, ಜಿಲ್ಲಾ ಪಂಚಾಯತ್ ಸಿಇಓ ನೋಂಗ್ಜಾಯ್ ಅಹಮದ್ ಅಲಿ ಅಕ್ರಂ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.



More Stories
ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್, ಕೋಟ್ಯಂತರ ರೂಪಾಯಿ ರಾಜಸ್ವ ಸಂಗ್ರಹ : ಅಬಕಾರಿ ನಿರೀಕ್ಷಕಿ ಎಸ್.ಬಿ.ಮಮತಾ
ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ನಿಲ್ಲಿಸಿ: ಕೇಂದ್ರ ಸರ್ಕಾರದ ವಿರುದ್ಧ ಅಶೋಕ್ ಭೀಮನಾಯ್ಕ ಆಕ್ರೋಶ
ನಿಯಮ ಉಲ್ಲಂಘಿಸಿದರೆ ಕಠಿಣ ದಂಡ